ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ವಿರುದ್ಧ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ: ಕೆಲ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಕುರಿತು ಸಚಿವ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರಿ ಆಸ್ಪತ್ರೆಯ ಜೊತೆ ಜೊತೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಸೇರಿಸಿಕೊಂಡು ಕೊರೊನಾ ಸೋಂಕು ತಡೆಯುವಲ್ಲಿ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿನ್ನೆ ಕೊರೊನಾ ವಿಷಯದಲ್ಲಿ ಸರ್ಕಾರದ ನಿಯಮಗಳನ್ನು ಅನುಸರಿಸಬೇಕಾದ ಅಂಶಗಳ ಕುರಿತು ಸಭೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ, ಸಮನ್ವಯ ಸಭೆ ನಡೆಸಿದರು. ಈ ವೇಳೆ ಕೆಲ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ಕೊರೊನಾ ಸೋಂಕಿತ ವ್ಯಕ್ತಿಗಳ ಜೊತೆ ಸರಿಯಾಗಿ ನಡೆದುಕೊಳ್ಳಿ. ಅವರಿಗೆ ಸರಿಯಾಗಿ ಚಿಕಿತ್ಸೆ ನೀಡಿ ಎಂದು ತಾಕೀತು ಮಾಡಿದರು. ಕೆಲ ಆಸ್ಪತ್ರೆಗಳ ಸಿಬ್ಬಂದಿ ಈ ವಿಷಯದಲ್ಲಿ ಅಸಡ್ಡೆ ತೋರಿದ್ದು, ಅಂತಹ ಆಸ್ಪತ್ರೆ ಮೇಲೆ ಮುಂದಿನ ದಿನಗಳಲ್ಲಿ ಕಠಿಣ ನಿಲುವು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ರಾಜ್ಯ ಕಂದಾಯ ಇಲಾಖಾ ನೌಕರರಿಗೂ, ಕೊರೊನಾ ತಡೆಯುವ ನಿಟ್ಟಿನಲ್ಲಿ, ಆಯುರ್ವೇದ ಬೂಸ್ಟರ್ ಔಷಧ ಕಿಟ್ ನ್ನು ಸಚಿವ ಈಶ್ವರಪ್ಪ ವಿತರಿಸಿದರು.