ಬ್ರಹ್ಮಗಿರಿ ಬೆಟ್ಟ ಕುಸಿದು ಎರಡು ಮನೆ ನಾಶ, ನಾಲ್ವರು ನಾಪತ್ತೆ!

ಮಡಿಕೇರಿ: ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರ ಎರಡು ಮನೆ ಮೇಲೆ ಬಿದ್ದಿದೆ.
ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿದ್ದಾರೆ. ತಲಕಾವೇರಿಯ ಮನೆ ಖಾಲಿ ಇದೆ. ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿದ್ದಾರೆ. ನಾಲ್ವರು ಕಾಣೆಯಾಗಿರುವ ಮಾಹಿತಿ ಇದ್ದು ಜಿಲ್ಲೆಯ ರಕ್ಷಣಾ ಪಡೆ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಕೊಡಗು ಜಿಲ್ಲಾಡಳಿತ ಮಾಹಿತಿ ನೀಡಿದೆ.
