ಯುವಕರನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ!

ಚಿತ್ರದುರ್ಗ: ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವ ಘಟನೆ ನಗರದಲ್ಲಿ ನಡೆದಿದೆ. ತಾಲೂಕಿನ ಅಡವಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಹಲ್ಲೆಗೊಳಗಾದವರ ವಿರುದ್ಧವೇ ಹಲ್ಲೆಕೋರರು ದೂರು ದಾಖಲಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಸುಪಾರಿ ಹಂತಕರೆಂದು ದೂರು ನೀಡಿದ್ದಾರೆ. ರಾತ್ರಿ ವೇಳೆ ಅಮಾಯಕ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಲಭ್ಯವಾಗಿದೆ. ಈ ಮೂವರು ಯುವಕರು ಗಾರೆ ಕೆಲಸ ಮಾಡಿಕೊಂಡಿದ್ದರು. ಚೋಳಗುಡ್ಡ ನಿವಾಸಿ ಜಯಸೂರ್ಯ, ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ ಪುರ ನಿವಾಸಿ ಮಾರುತಿ, ಶರತ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಪೂರ್ವಪರ ವಿಚಾರಿಸದೆ ಅಮಾಯಕರ ವಿರುದ್ಧ ಭರಮಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
